ಶಿವಮೊಗ್ಗ,ಏ.17:
ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದಅವಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.
ತಾಲ್ಲೂಕಿನ ಹೊಳೆಬೆನವಳ್ಳಿ, ಪಿಳ್ಳಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಚಾಯಿತಿ ವೃತ್ತದಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಗೆ ಗೌರವ ಸಲ್ಲಿಸಬೇಕಿದೆ. ಆದ್ದರಿಂದ, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಕ್ಕಗೆ ಮತ ನೀಡಿ, ಹರಸಬೇಕು ಎಂದ ಅವರು, ಬಿಜೆಪಿ ಪಕ್ಷದ ನಾಯಕರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಆದ್ದರಿಂದ, ಬಡವರ ಪರ ಧ್ವನಿ ಆಗಲು ಸಾಧ್ಯವಾಗಿಲ್ಲ. ಇದರಿಂದ, ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮುಕ್ತಿ ನೀಡಬೇಕಿದೆ ಎಂದರು.
ಬಿಜೆಪಿ ಪಕ್ಷದವರು ಜಾತಿ- ಧರ್ಮದ ಅಮಲಿನಲ್ಲಿ ತೇಲುತ್ತಿದ್ದಾರೆ. ಇಲ್ಲಿ ರಾಮನ ಹೆಸರು ಹಾಗೂ ಧರ್ಮದ ಹೆಸರಿನಲ್ಲಿ ಬಿಜೆಪಿ ಮತಯಾಚಿಸುತ್ತಿದೆ. ಇದರಿಂದ ಜನ ಸಾಮಾನ್ಯರ ಸಂಕಷ್ಟ ನೀಗಿಸಲು ಸಾಧ್ಯವಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದರೆ. ಗ್ಯಾರಂಟಿಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಏ.೧೮ ರಂದು ಸಂಸದ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಅವರ ಪಕ್ಕದಲ್ಲಿ, ಹೆಣ್ಣು ಮಕ್ಕಳಿಗೆ ಅವಮಾನಿಸಿದ ಕುಮಾರ ಸ್ವಾಮಿ ನಿಲ್ಲಲಿದ್ದಾರೆ. ಆದ್ದರಿಂದ, ಹೆಣ್ಣಿಗೆ ಗೌರವ ನೀಡದವರಿಗೆ ಮತ ನೀಡಕೂಡದು. -ಆಯನೂರು ಮಂಜುನಾಥ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ನಮ್ಮ ಸರ್ಕಾರ ಜಾರಿಗೊಳಿಸಿರುವ ಎಲ್ಲ ಗ್ಯಾರಂಟಿ ಯೋಜನೆಗಳು ಐದು ವರ್ಷದವರೆಗೂ ಚಾಲ್ತಿಯಲ್ಲಿರುತ್ತವೆ. ಲೋಕಸಭೆ ಚುನಾವಣೆ ನಂತರ ಈ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂಬ ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಹಿಂದೆ ಬಡವರ ಪರವಾದ ಯೋಜನೆಗಳನ್ನು ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ಜಾರಿಗೆ ತಂದಿದ್ದರು. ಆ ಯೋಜನೆಗಳಿಂದ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಆ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು ಎಂದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ₹56 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಜನರ ಬಾಗಿಲಿಗೆ ತಲುಪಿಸಲಾಗಿದೆ. ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರನ್ನು ಮತ ನೀಡುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಶ್ರೀನಿವಾಸ್ ಕರಿಯಣ್ಣ, ಆರ್.ರವಿ ಕುಮಾರ್, ವೇದಾ ವಿಜಯ್ ಕುಮಾರ್, ರಮೇಶ್ ಕುಬಟೆ, ಎಸ್.ರವಿಕುಮಾರ್, ರಮೇಶ, ಹನುಮಂತ ಇದ್ದರು.