ಸಾಗರ : ಕೆಲಸ ಮಾಡಲು ಆಸಕ್ತಿ ಇಲ್ಲದಿದ್ದರೆ ಬೇರೆ ಕಡೆ ವರ್ಗ ಮಾಡಿಸಿಕೊಂಡು ಹೋಗಿ. ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನೆ ಇರುವುದಿಲ್ಲ. ನಾಳೆ ಬಾ.. ನಾಡಿದ್ದು ಬಾ ಎಂದು ಹೇಳಿ ಜನರನ್ನು ಕಚೇರಿಗೆ ಅಲೆಸಬೇಡಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಂದಾಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿದ ಘಟನೆ ನಡೆದಿದೆ.

ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಬಗರ್ಹುಕುಂ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರು ಅನೇಕ ನಿರೀಕ್ಷೆ ಇರಸಿಕೊಂಡು ಕಚೇರಿಗೆ ಬರುತ್ತಾರೆ. ಅವರ ಕೆಲಸ ಮಾಡಿಕೊಡಿ. ಅದನ್ನು ಬಿಟ್ಟು ಅವರನ್ನು ಸತಾಯಿಸಬೇಡಿ. ಕೆಲವು ನೌಕರರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ತಕ್ಷಣ ಅವರನ್ನು ಕೆಲಸದಿಂದ ವಜಾಮಾಡಲು ತಹಶೀಲ್ದಾರ್ ಸೂಚನೆ ನೀಡಿದರು.

ಕಂದಾಯ ಇಲಾಖೆ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ. ಬೇಕಾಬಿಟ್ಟಿ ಕೆಲಸ ಮಾಡಲು ಇದು ಸಂತೆ ಮಾರ್ಕೇಟ್ ಅಲ್ಲ. ನೀವು ಕೆಲಸ ಮಾಡಲು ಬಂದಿದ್ದೀರಾ, ಇಲ್ಲ ಹುಡುಗಾಟ ಮಾಡಲು ಬಂದಿದ್ದೀರಾ ಎಂದು ಕೋಪದಿಂದ ತರಾಟೆಗೆ ತೆಗೆದುಕೊಂಡ ಶಾಸಕರು, ಇದೇನು ಕಚೇರಿಯಾ ಕೆಟ್ಟುಕೆರ ಹಿಡಿದು ಹೋಗಿದೆ. ತಹಶೀಲ್ದಾರ್ ಕಚೇರಿಯಲ್ಲಿ ಎಫ್ಡಿಎ ಆಗಿ ಸೇವೆ ಸಲ್ಲಿಸಿ ತೀರ್ಥಹಳ್ಳಿಗೆ ವರ್ಗಾವಣೆಗೊಂಡಿರುವ ಆಕಾಶ್ ಎಂಬ ಅಧಿಕಾರಿ ಎರಡು ವರ್ಷದಿಂದ ಚಾರ್ಜ್ ಕೊಟ್ಟಿಲ್ಲ. ಅವರನ್ನು ಅಮಾನತ್ತು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಫೋನ್ ಮೂಲಕ ತಿಳಿಸಿದರು.

ತಾಲ್ಲೂಕಿನಲ್ಲಿ ಬಗರ್ಹುಕುಂ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತಕ್ಷಣ ಪರಿಶೀಲನೆ ನಡೆಸಿ ಅರ್ಹರಿಗೆ ಭೂಮಂಜೂರಾತಿ ಮಾಡಲಾಗುತ್ತದೆ. ಹೊಸದಾಗಿ ಯಾರೂ ಭೂಮಿ ಒತ್ತುವರಿ ಮಾಡಿಕೊಳ್ಳುವಂತೆ ಇಲ್ಲ. ಕಾನೂನಿನ ಪ್ರಕಾರ ಹಿಂದೆ ಸಾಗುವಳಿ ಮಾಡಿಕೊಂಡು, ಸ್ವಾಧೀನದಲ್ಲಿ ಹೊಂದಿದವರನ್ನು ಭೂಮಂಜೂರಾತಿ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಬಗರ್ಹುಕುಂ ಸಮಿತಿ ಸದಸ್ಯ ಕೆ.ಹೊಳೆಯಪ್ಪ, ರವಿಕುಮಾರ್ ಆನಂದಪುರಂ, ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್ ಇನ್ನಿತರರು ಹಾಜರಿದ್ದರು.