ಶಿವಮೊಗ್ಗ : ಬದುಕು ಹಾಗೂ ಬದುಕಲು ಬಿಡು ಎಂಬುದು ನಮ್ಮ ಬಾಳಿನ ಧ್ಯೇಯವಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ನಿಂದ ನಮ್ಮ ಕಾಡು ನಮ್ಮ ಕೆರೆ ಹಾಗೂ ನಮ್ಮೂರ ನಮ್ಮ ಕೆರೆ ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಿದ ಕೆರೆಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಸ್ವ ಸಹಾಯ ಸಂಘಗಳ ಸಾಧನಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಕೃತಿಯಲ್ಲಿ ಎಲ್ಲರಿಗೂ ಜೀವಿಸುವ ಹಕ್ಕಿದೆ. ಕಾಡು ಪ್ರಾಣಿಗಳು ಇದಕ್ಕೆ ಹೊರತಲ್ಲ. ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ತಡೆಯಲು ಅರಣ್ಯದೊಳಗೆ ಕಾಡು ಪ್ರಾಣಿಗಳಿಗೆ ನೀರು, ಆಹಾರ ದೊರೆಯುವಂತೆ ಮಾಡುವುದೇ ಪರಿಹಾರವಾಗಿದೆ. ಹೀಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನಮ್ಮ ಕಾಡು ನಮ್ಮ ಕೆರೆ ಯೋಜನೆಯಡಿ ಅರಣ್ಯದೊಳಗಿನ ಕೆರೆಗಳನ್ನು ಅಭಿವೃದ್ಧಿಪಡಿಸಿ ಅಲ್ಲಿ ಕಾಡು ಪ್ರಾಣಿಗಳಿಗೆ ನೀರೊದಗಿಸುವ ಕೆಲಸ ಮಾಡಲಾಗುತ್ತಿದೆ. ಅರಣ್ಯದೊಳಗೆ ಕಾಡು ಜಾತಿಯ ಸಸಿಗಳನ್ನು ನೆಟ್ಟು ಭವಿಷ್ಯದಲ್ಲಿ ಅದರ ಮೂಲಕ ಪ್ರಾಣಿಗಳಿಗೆ ಹಣ್ಣು ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಉತ್ತಮ ಕೆಲಸಗಳಾಗುತ್ತಿವೆ. ಆದರೆ ನಾವು ಉತ್ತಮ ಕೆಲಸ ಮಾಡುತ್ತಿರುವುದರಿಂದಲೇ ಅನೇಕರು ನಮ್ಮನ್ನು ದ್ವೇಷಿಸುತ್ತಿದ್ದಾರೆ. ಮದ್ಯ ವಜ್ರ್ಯನ ಶಿಬಿರ ಆಯೋಜಿಸುತ್ತರಿವುದಕ್ಕೂ ಕೆಲವು ಆಕ್ಷೇಪಿಸುವುದುಂಟು. ಆದರೆ ಸಮಾಜ ನಮ್ಮ ಕಾರ್ಯಕ್ಕೆ ಸದಾ ಸ್ಪಂದಿಸುತ್ತಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಕೆ ಸದಾ ಸ್ಪಂದಿಸುತ್ತಿದ್ದರು. ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಅತಿವೃಷ್ಟಿಪೀಡಿತ ಉತ್ತರ ಕರ್ನಾಟಕದಲ್ಲಿ ಒಂದು ಸಾವಿರ ಮನೆ ನಿರ್ಮಾಣ ಮಾಡಿಕೊಡಲು ಮನವಿ ಮಾಡಿದ್ದರು. ಅವರು ನಮ್ಮ ಸಂಸ್ಥೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಅದೇ ರೀತಿ ಅವರ ಪುತ್ರ ಬಿ.ವೈ.ರಾಘವೇಂದ್ರ ಕೂಡಾ ನಮ್ಮ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಗೆ ಜಾಗ ಒದಗಿಸಿದ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವನ್ನೂ ಡಾ.ಹೆಗ್ಗಡೆ ಸ್ಮರಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಮಾಜದ ಎಲ್ಲ ಕ್ಷೇತ್ರಗಳಿಗೂ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರ ಸವಾರ್ಂಗೀಣ ಅಭಿವೃದ್ಧಿಗೆ ಹಲವು ಯೋಜನೆ, ಸಮರ್ಥ ಮಾರ್ಗದರ್ಶನ, ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ. ಸಾಮೂಹಿಕ ವಿವಾಹ ಆಯೋಜಿಸುವ ಮೂಲಕ ದುಂದುವೆಚ್ಚ ತಡೆಯುತ್ತಿದ್ದಾರೆ. ಕೆರೆ ಅಭಿವೃದ್ಧಿಪಡಿಸುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದಾರೆ ಎಂದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾಸಾಶನ ವಿತರಿಸಿದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಜನಮಂಗಲ ಕಾರ್ಯಕ್ರಮದಡಿ ವಿವಿಧ ಸಲಕರಣೆಗಳನ್ನು, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸಸಿ ವಿತರಣೆ ಮಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಎಸ್.ಎಸ್.ಅನಿಲ್ಕುಮಾರ್, ಶಾಸಕಿ ಶಾರದಾ ಪೂರ್ಯಾ ನಾಯ್ಕಾ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ತ್ಯಾವರೆಕೊಪ್ಪ ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಪ್ರಬಂಧಕ ಎಂ.ನರೇನ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸೊಪ್ಪುಗುಡ್ಡೆ ರಾಘವೇಂದ್ರ, ಪ್ರಮುಖರಾದ ಜೀವಂದರ್ ಜೈನ್ ಮುಂತಾದವರಿದ್ದರು.