ಶಿವಮೊಗ್ಗ : ಜುಲೈ ೦೭ : ನಗರದ ರಾಜ್ಯ ಮಹಿಳಾ ನಿಲಯ ಮತ್ತು ಮಕ್ಕಳ ಪಾಲನಾ ಸಂಸ್ಥೆಯ ಸುಪರ್ದಿಯಲ್ಲಿನ ನಿವಾಸಿಗಳ ಆರೋಗ್ಯ ಮತ್ತು ಸುರಕ್ಷತೆಗೆ ವಿಶೇಷ ಗಮನ ನೀಡುವಂತೆ ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶರು ಹಾಗೂ ೨ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ದೀಪಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಮೆಗ್ಗಾನ್ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿದರು.

ಅವರು ಇಂದು ರಾಜ್ಯ ಮಹಿಳಾ ನಿಲಯದ ಸಭಾಂಗಣದಲ್ಲಿ ರಾಜ್ಯ ಮಹಿಳಾ ನಿಲಯ ಮತ್ತು ಮಕ್ಕಳ ನಿರ್ದೇಶನಾಲಯದ ವ್ಯಾಪ್ತಿಗೊಳಪಡುವ ಮಕ್ಕಳ ಪಾಲನಾ ಸಂಸ್ಥೆಗಳ ನಿವಾಸಿಗಳ ಕುರಿತು ಏರ್ಪಡಿಸಲಾಗಿದ್ದ ಸಂಬಂಧಿತ ವಿವಿಧ ಇಲಾಖಾ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳ ಪಾಲನಾ ಸಂಸ್ಥೆ ಮತ್ತು ಮಹಿಳಾ ನಿಲಯದಲ್ಲಿನ ನಿವಾಸಿಗಳು ಅದರಲ್ಲೂ ವಿಶೇಷವಾಗಿ ಮಾನಸಿಕ ಮತ್ತು ಬೌದ್ಧಿಕ ವಿಕಾರಗಳಿಗೆ ಒಳಗಾಗಿರುವರ ಆರೋಗ್ಯ ಮತ್ತು ದೈಹಿಕ ತಪಾಸಣೆಗೆ ಕಾಲಕಾಲಕ್ಕೆ ಆರೋಗ್ಯ ಇಲಾಖೆಯಿಂದ ವೈದ್ಯರನ್ನು ನಿಯೋಜಿಸಬೇಕು. ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗೆ ಅನುಕೂಲವಾಗುವಂತೆ ಮಹಿಳಾ ಸಿಬ್ಬಂಧಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ವಿವಿಧ ಪ್ರಕರಣಗಳಲ್ಲಿ ದೌರ್ಜನ್ಯಕ್ಕೊಳಗಾದ, ಅನಾಥ, ಒಪ್ಪಿಸಲ್ಪಟ್ಟ, ಬಿಕ್ಷೆ ಬೇಡುವ, ಚಿಂದಿ ಆಯುವ, ಬೀದಿಬದಿಯ ನಿರ್ಲಕ್ಷ್ಯಕ್ಕೆ ಒಳಗಾದ, ಸಂಘರ್ಷಕ್ಕೆ ಒಳಗಾದ, ಪಾಲನೆ ಮತ್ತು ಪೋಷಣೆಯ ಅಗತ್ಯವಿರುವ ಮಕ್ಕಳು, ಸರ್ಕಾರಿ ಪಾಲನಾ ಸಂಸ್ಥೆಗಳು ಮತ್ತು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲಿಸುವ ಮಕ್ಕಳಿಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು. ಇಂತಹ ತುರ್ತು ಸಂದರ್ಭಗಳಲ್ಲಿ ನಗರದ ಮೆಗ್ಗಾನ್ಆಸ್ಪತ್ರೆಗೆ ಬಾಧಿತರನ್ನು ಕರೆದುಕೊಂಡು ಹೋದಾಗ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ವಿಳಂಬವಾಗುತ್ತಿದೆ. ಅಲ್ಲದೇ ಮಾನಸಿಕ ವಿಕಾರಗಳಿಗೆ ಒಳಗಾಗಿರುವ ಪ್ರಕರಣಗಳಿದ್ದಾಗ ಮಾನವೀಯ ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಭಾವಿಸಿ, ವಿಳಂಬಕ್ಕೆ ಅವಕಾಶವಿಲ್ಲದಂತೆ ಕೂಡಲೇ ತಪಾಸಣೆ ನಡೆಸಿ, ಅಗತ್ಯ ಔಷಧ ನೀಡಿ ಕಳುಹಿಸಿಕೊಡಬೇಕು ಎಂದು ಸೂಚಿಸಿದ ಅವರು, ಮೆಗ್ಗಾನ್ಸ್ವಾಯತ್ತ ಸಂಸ್ಥೆಯಾಗಿರುವ ಕಾರಣ ಆರೋಗ್ಯ ತಪಾಸಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಈ ಶುಲ್ಕ ಪಾವತಿಸುವಲ್ಲಿ ಇಲ್ಲಿನ ನಿವಾಸಿಗಳಿಗೆ ವಿನಾಯಿತಿ ನೀಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ತುರ್ತು ಕ್ರಮ ಕೈಗೊಳ್ಳಬೇಕು. ಹಾಗೂ ಅಲ್ಲಿನ ಅಧೀನ ಅಧಿಕಾರಿ-ಸಿಬ್ಬಂಧಿಗಳಿಗೆ ಮಾರ್ಗದರ್ಶನ ನೀಡುವಂತೆ ಅವರು ಸಲಹೆ ನೀಡಿದರು.

ಕೆಲವು ಪ್ರಕರಣಗಳಲ್ಲಿ ದಾಖಲಾಗುವ ಅಪ್ರಾಪ್ತ ಮಕ್ಕಳು ಸರದಿ ಸಾಲಿನಲ್ಲಿರುವಾಗ ಸಂಸ್ಥೆಯ ರಕ್ಷಕರಿಂದ ತಪ್ಪಿಸಿಕೊಳ್ಳುವ ಸಂಭವನೀಯತೆಯೂ ಹೆಚ್ಚಾಗಿರುತ್ತದೆ. ಅಲ್ಲದೇ ಅಪ್ರಾಪ್ತ ಮಕ್ಕಳ ಗೌಪ್ಯತೆಯನ್ನು ಕಾಪಾಡುವಲ್ಲಿ ಬಾಲನ್ಯಾಯ ಕಾಯ್ದೆಯ ಉಲ್ಲಂಘನೆ ಆಗುತ್ತಿರುವುದನ್ನು ಮಂಡಳಿ ಗಂಭೀರವಾಗಿ ಪರಿಗಣಿಸಿದೆ ಎಂದ ಅವರು, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ಥ ಮಕ್ಕಳ ಚಿಕಿತ್ಸೆಗಾಗಿ ಗೌಪ್ಯತೆಯ ದೃಷ್ಠಿಯಿಂದ ಪ್ರತ್ಯೇಕ ವ್ಯವಸ್ಥೆ ಒದಗಿಸಲು ಮುಂದಾಗುವಂತೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಫೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದ ಅವರು, ಅವುಗಳ ನಿಯಂತ್ರಣದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ನಿಲಯವು ಅನೇಕ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಡಾ|| ಕೆ.ಎಸ್.ಪವಿತ್ರಾ, ಶ್ರೀಮತಿ ರೇಖಾ ಜಿ.ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.