ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ನಾಳೆಯಿಂದ 25 ರವರೆಗೆಎರಡು ದಿನಗಳ ಕಾಲ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚಗಿರಿ ಮಹಾಸಂಸ್ಥಾನ ಮಠದಲ್ಲಿ ರಾಜ್ಯಮಟ್ಟದ 46ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳ ಚುಂಚಶ್ರೀ ಪ್ರಶಸ್ತಿ ಪ್ರಧಾನ ನಡೆಯಲಿದೆ.

ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಜಾನಪದ ಕಲಾವಿದರು ತಾವು ಕಲಿತಿರುವ ಗ್ರಾಮೀಣ ಸೊಗಡಿನ ಕಲೆಯನ್ನು ಪ್ರದರ್ಶಿಸುವ ಮೂಲಕ ಭೈರವೈಕ್ಯ ಬಾಲಗಂಗಾಧನಾಥ ಮಹಾ ಸ್ವಾಮೀಜಿಗಳವರ ಆಶಯವನ್ನು ಈಡೇರಿಸಲಿದ್ದಾರೆ.
ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ರಾಜ್ಯಮಟ್ಟದ ಜಾನಪದ ಕಲಾ ಮೇಳವನ್ನು ಇಂದು ಸಂಜೆ 5:00 ಗಂಟೆಗೆ ಶ್ರೀಗಳ ಜೊತೆಗೂಡಿ ಗಣ್ಯರು ಉದ್ಘಾಟಿಸಲಿದ್ದಾರೆ.

ಮುತ್ತಿನ ಪಾಲಕಿ ಉತ್ಸವ – ತೆಪ್ಪೋತ್ಸವ : ಸಂಜೆ 8:30 ಗಂಟೆಗೆ ಶ್ರೀ ಕ್ಷೇತ್ರದ ಜೋಡಿ ರಸ್ತೆಯಲ್ಲಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಸರ್ವಾಲಂಕೃತ ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಜನಪದ ಕಲಾವಿದರ ವರ್ಣರಂಜಿತ ಮೆರವಣಿಗೆ ನಡೆಯುತ್ತದೆ. ಆ ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಪುಷ್ಕರಣಿಯಲ್ಲಿ ತೆಪ್ಪೋತ್ಸವ ಜರುಗಲಿದೆ.

ಶ್ರೀ ಗುರು ಸಂಸ್ಮರ ಣೋತ್ಸವ:
ಸೆ. 25ರ ಬೆಳಿಗ್ಗೆ 9:30 ಕ್ಕೆ ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕ, ಶ್ರೀ ಗುರು ಸಂಸ್ಮರಣೋತ್ಸವ ಮತ್ತು ರಾಜ್ಯಮಟ್ಟದ 46ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳದ ಸಮಾರೋಪ ಸಮಾರಂಭ ನಡೆಯಲಿದೆ.ಜಾನಪದ ಕ್ಷೇತ್ರದ ನಾಡಿನ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಜಾನಪದ ಕಲಾಮೇಳದಲ್ಲಿ ಭಾಗವಹಿಸುವ ಎಲ್ಲಾ ಕಲಾವಿದರಿಗೆ ವಸ್ತ್ರ ಸೇರಿದಂತೆ ಪ್ರಯಾಣ ಭತ್ಯ ಹಾಗೂ ಉಚಿತ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು. ಜಾನಪದ ಕಲಾ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ತಮ್ಮ ಆಧಾರ್ ಕಾರ್ಡ್ ಜೊತೆಗೆ ತಮ್ಮ ಜಿಲ್ಲೆಯ ಆದಿಚುಂಚನಗಿರಿ ಶಾಖಾಮಠ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾಗವಹಿಸುವಿಕೆಯ ಪತ್ರವನ್ನು ಕಡ್ಡಾಯವಾಗಿ ತರತಕ್ಕದ್ದು, ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ:*
ಬೆಳಿಗ್ಗೆ 10:00 ಗಂಟೆಗೆ ರಾಜ್ಯಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳವನ್ನು ಉದ್ಘಾಟಿಸಿದ ಬಳಿಕ ಶ್ರೀ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಂದನಾಥ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಚುಂಚಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಎಚ್.ಎಂ.ವೆಂಕಟಪ್ಪ, ಸಮಾಜ ಸೇವಾ ಕ್ಷೇತ್ರದಿಂದ ಎಸ್. ಜಿ. ನಾರಾಯಣ, ಕ್ರೀಡಾ ಕ್ಷೇತ್ರದ ಸಾಧಕ ಡಾ. ಸಿ. ಹೊನ್ನಪ್ಪ ಗೌಡ, ಕೃಷಿ ಮತ್ತು ಪರಿಸರ ಕ್ಷೇತ್ರದಿಂದ ಡಾ. ಎಲ್. ಹನುಮಯ್ಯ ಮತ್ತು ಜಾನಪದ ಕ್ಷೇತ್ರದ ಸಾಧಕ ಜಿ.ಡಿ. ತಿಮ್ಮಯ್ಯ ಅವರಿಗೆ 50 ಸಾವಿರ ನಗದು ನೆನಪಿನ ಕಾಣಿಕ ಸೇರಿದಂತೆ ಪ್ರಶಸ್ತಿ ಫಲಕಗಳನ್ನೊಳಗೊಂಡ ಈ ವರ್ಷದ ಚುಂಚಶ್ರೀ ಪ್ರಶಸ್ತಿ ಪ್ರದಾನ ಮಾಡಿ ಶ್ರೀ ಮಠದಿಂದ ಪರಮ ಪೂಜ್ಯ ಶ್ರೀಗಳು ಗೌರವಿಸುವರು.