ಶಿವಮೊಗ್ಗ : ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಮಾಡಿಕೊಳ್ಳದೇ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ೪೩೨ ಪದವಿ ಕಾಲೇಜುಗಳಲ್ಲಿ ೬೦೦೦ ಖಾಯಂ ಉಪನ್ಯಾಸಕರಲ್ಲಿ ೩೦೦೦ಕ್ಕಿಂತ ಹೆಚ್ಚು ಉಪನ್ಯಾಸಕರು ಈಗಾಗಲೇ ನಿವೃತ್ತಿ ಪಡೆದಿದ್ದು, ಇನ್ನೂ ಕೇವಲ ೩೦೦೦ ಖಾಯಂ ಉಪನ್ಯಾಸಕರೊಂದಿಗೆ ೧೨,೦೦೦ ಅತಿಥಿ ಉಪನ್ಯಾಸಕರ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿವೆ. ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು. ಆದರೆ ಗುಣಮಟ್ಟದ ಶಿಕ್ಷಣ ನೀಡಬೇಕಾದ ಸರ್ಕಾರಗಳು ಕರ್ತವ್ಯಪ್ರಜ್ಞೆ ಮರೆತು ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ಕ್ರಮಕೈಗೊಳ್ಳದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.

೨೦೨೫-೨೬ನೇ ಸಾಲಿನಲ್ಲಿ ಖಾಲಿ ಇರುವ ೧೨,೦೦೦ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ೫೫ ಸಾವಿರ ಅರ್ಜಿ ಸಲ್ಲಿಕೆಯಾಗಿವೆ. ಎಲ್ಲಾ ವಿವಿಗಳಲ್ಲಿ ತರಗತಿ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ. ತರಗತಿಗಳು ನಡೆಯುತ್ತಿಲ್ಲ. ಹೀಗಾಗಿ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ನಗರಸಹಕಾರ್ಯದರ್ಶಿ ನಂದನ್ ಎಂ., ಚೇತನ್, ಸಚಿನ್, ಧನಂಜಯ, ವರುಣ್, ಕಾರ್ತೀಕ್, ಪ್ರವೀಣ್ ಇತರರಿದ್ದರು.