ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು.
ಅಂಬೇಡ್ಕರ್ ಭವನದಲ್ಲಿ ಸಹ್ಯಾದ್ರಿ ಪ್ರೌಢಶಾಲೆ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರಾಕ್ಟ್ ಕ್ಲಬ್ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ.ಬಿ.ಆರ್ ಮಾತನಾಡಿ, ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದು ಮುಖ್ಯ. ಮಕ್ಕಳು ಉತ್ತಮ ಸಾಧನೆ ಮಾಡಲು ನಿರಂತರ ಪರಿಶ್ರಮ ವಹಿಸಬೇಕು. ಶಿಕ್ಷಕರ ಮಾರ್ಗದರ್ಶನ ಪಾಲನೆ ಮಾಡಿದಾಗ ಯಶಸ್ಸು ಸಾಧ್ಯ ಎಂದು ಹೇಳಿದರು.

ಶ್ರೀನಿಧಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಮಾತನಾಡಿ, ಶಿಕ್ಷಣ ಸಂಸ್ಥೆ ಬೆಳೆಯುವಲ್ಲಿ ಪೋಷಕರು, ಶಿಕ್ಷಕರು ಹಾಗೂ ಮಕ್ಕಳ ಪಾತ್ರ ಬಹಳ ಮುಖ್ಯ. ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸುವುದಲ್ಲದೆ ಶಾಲೆಗೆ ಬಂದು ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೊಳಿಗೆ ಡಿ ವಾಸಪ್ಪ ಗೌಡ, ಹೊಸತೋಟ, ಜಿ.ವಿಜಯಕುಮಾರ್ ಶಬರಿ ಕಡಿದಾಳ್, ದೇವಪ್ಪ, ಎಂ.ಎಂ.ಮಯೋದರ ಹಾಗೂ ಆಡಳಿತ ಅಧಿಕಾರಿ ಟಿಪಿ ನಾಗರಾಜ್, ಮುಖ್ಯೋಪಾಧ್ಯಯಿನಿ ಉಮ್ಮೆ ಸಲ್ಮಾ, ಶಾಲೆಯ ಎಲ್ಲಾ ಅಧ್ಯಾಪಕರು, ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು. ಮಕ್ಕಳು ತಮ್ಮ ಸಾಂಸ್ಕೃತಿಕ ಚಟುವಟಿಕೆಗಳಿಂದ ಎಲ್ಲರನ್ನು ರಂಜಿಸಿದರು.