ಶಿವಮೊಗ್ಗ : ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್ರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಸಂತ್ರಸ್ಥೆ ಬೆಂಗಳೂರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಆರೋಪಿ ಗಿರೀಶ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗಿರೀಶ್ ಬೆಂಗಳೂರಿನ ಕಾಲೇಜುವೊಂದರಲ್ಲಿ ಬಿ.ಇ. ವಿದ್ಯಾಭ್ಯಾಸ ಮಾಡುತ್ತಿದ್ದ ತನ್ನದೇ ಸಮುದಾಯದ ೧೯ ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡ ಆರೋಪದ ಹಿನ್ನಲೆಯಲ್ಲಿ ಈತನನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ದಿನಾಂಕ ೨೩/೧/೨೦೨೫ ರಂದು ಜ್ಞಾನಭಾರತಿ ಪೊಲೀಸ್ ಠಾಣೆ ಹಾಜರಾದ ಯುವತಿ ಗಿರೀಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ೨೫/೧/೨೦೨೫ ರಿಂದ ಜುಲೈ ೨೦೨೫ರ ವರೆಗೂ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದು, ಇದೀಗ ಮದುವೆಯಾಗದೆ, ನನ್ನ ಖಾಸಗಿ ಪೋಟೊಗಳನ್ನು ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರು ನೀಡಿದ್ದಾರೆ.
ಅದರಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯಡಿ ಲೈಂಗಿಕವಾಗಿ ದುರ್ಬಳಕೆ, ಆಮಿಷ, ವಂಚನೆ ಪ್ರಕರಣವನ್ನು ದಾಖಲಿಸಿ ಗಿರೀಶ್ ನನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಸೇಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ಪ್ರಾಂಶುಪಾಲ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ಸಂತ್ರಸ್ತ ವಿದ್ಯಾರ್ಥಿನಿ ಪರವಾಗಿ ನ್ಯಾಯಾಲಯ ವಿಷಯದಲ್ಲಿ ಸಹಾಯ ಮಾಡುವುದಾಗಿ ಪರಿಚಯವಾದ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷನೆಂದು ಕೊಂಡು ಓಡಾಡುತ್ತಿದ್ದ ಗಿರೀಶ್ ಡಿ.ಆರ್. ಬೆಂಗಳೂರಿನಲ್ಲಿ ಬಿ.ಇ. ಓದುತ್ತಿದ್ದ ಈ ವಿದ್ಯಾರ್ಥಿಯನ್ನು ಪ್ರೀತಿಸುವುದಾಗಿ ನಂಬಿಸಿ ಬೆಂಗಳೂರು. ಶಿವಮೊಗ್ಗ, ಮೈಸೂರುಗಳಿಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಮತ್ತು ಮದುವೆಯಾಗುವುದಾಗಿಯೂ ನಂಬಿಸಿದ್ದು, ಇದೀಗ ಮದುವೆಯಾಗುವಂತೆ ಕೇಳಿದರೆ ತನ್ನ ಖಾಸಗಿ ಪೋಟೊಗಳು, ವಾಟ್ಸಾಪ್ ಮೆಸೇಜ್ಗಳನ್ನು ಸಂಬಂಧಿಕರಿಗೆ ಕಳುಹಿಸಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.