ಶಿವಮೊಗ್ಗ,ಜೂ.12: ನಗರದ ಗಾಂಧಿ ಬಜಾರ್ 1ನೇ ಕ್ರಾಸ್ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಗೋವಿಂದಾಪುರ ಆಶ್ರಯ ಬಡಾವಣೆಯ ನಿವಾಸಿಯಾಗಿದ್ದ ನರಸಿಂಹನ ಮೇಲೆ ದುಷ್ಕರ್ಮಿಗಳು ಪೂರ್ವಯೋಜಿತವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮನೆಯೊಂದರ ಓಣಿ ಒಳಗೆ ತೆರಳಿದ್ದ ವೇಳೆ ಏಕಾಏಕಿ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದುಷ್ಕರ್ಮಿಗಳು ಮನಸೋಯಿಚ್ಛೆ ದಾಳಿ ನಡೆಸಿದ್ದು, ದಾಳಿಯ ವೇಳೆ ನರಸಿಂಹನ ತಲೆ ಹಾಗೂ ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ದಾಳಿಯ ತೀವ್ರತೆಗೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಪ್ರಾಥಮಿಕ ತನಿಖೆ ಪ್ರಕಾರ, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ದಾಳಿ ನಡೆಸಿ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿರುವ ಪೊಲೀಸರಿಂದ ತನಿಖೆ ಮುಂದುವರೆದಿದೆ.