ಶಿವಮೊಗ್ಗ ಜೂ, 23): ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಜಂಟಿಯಾಗಿ ದಾಳಿ ನಡೆಸಿ, ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ದಿನಾಂಕ 22-06-2026 ರಂದು ನಡೆದ ಈ ಜಂಟಿ ಕಾರ್ಯಾಚರಣೆಯಲ್ಲಿ, ಮನೆಯೊಂದರ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಇಬ್ಬರು ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಿ, ಆ ಪ್ರದೇಶದಿಂದ ಮುಕ್ತಗೊಳಿಸಲಾಗಿದೆ. ತದನಂತರ ರಕ್ಷಿಸಲ್ಪಟ್ಟ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಇದೇ ವೇಳೆ, ನಿಯಮ ಉಲ್ಲಂಘಿಸಿದ ಮಾಲೀಕರಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಅಧಿಕಾರಿಗಳು ಕಾನೂನು ಅರಿವು ಮೂಡಿಸಿದ್ದಾರೆ.
ಕಾನೂನು ಕ್ರಮದ ಎಚ್ಚರಿಕೆ:

ಪ್ರಸ್ತುತ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಉದ್ಯಮಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.

ಒಂದು ವೇಳೆ ನಿಯಮ ಮೀರಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ, ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆಯಡಿ ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗುವುದು. ಜೊತೆಗೆ ₹50,000 ವರೆಗೆ ದಂಡ ಅಥವಾ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.