ಶಿವಮೊಗ್ಗ, ಜುಲೈ 30ಮಾನವ ಕಳ್ಳಸಾಗಾಣಿಕೆಯು ಕಣ್ಣಿಗೆ ನೇರವಾಗಿ ಗೋಚರಿಸದಿದ್ದರೂ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧವಾಗಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಮೀರಿ ಇದನ್ನು ತಡೆಗಟ್ಟಲು ಸಕ್ರಿಯವಾಗಿ ಎಲ್ಲ ಅಧಿಕಾರಿಗಳು ತೊಡಗಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕರೆ ನೀಡಿದರು.
ನಗರದ ಡಿಎಆರ್ ಪೊಲೀಸ್ ಸಭಾ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೊದಲೆಲ್ಲ ಮಾನವ ಕಳ್ಳಸಾಗಾಣಿಕೆ ಎಂದರೆ ಬಾಲ ಕಾರ್ಮಿಕತೆ, ಜೀತ ಪದ್ದತಿ, ಭಿಕ್ಷಾಟನೆ ಕಣ್ಣ ಮುಂದೆ ಬರುತ್ತಿತ್ತು. ಈಗ ಇದು ಬಹು ಆಯಾಮಗಳುಳ್ಳ ಸಂಘಟಿತ ಅಪರಾಧವಾಗುತ್ತಿದೆ. ಮಕ್ಕಳಲ್ಲಿನ ಅತಿಯಾದ ಮೊಬೈಲ್ ಅವಲಂಬನೆ, ಸಾಮಾಜಿಕ ಜಾಲತಾಣಗಳ ಮೂಲಕ ಇತರರ ಹಿಡಿತಕ್ಕೆ ಒಳಗಾಗಿ ತಂದೆ ತಾಯಿಗೆ ಗೊತ್ತಾಗದಂತೆ ಮನೆಯಿಂದ ಓಡಿ ಹೋಗುವ ಪ್ರಕರಣಗಳೂ ಈ ಜಾಲಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ.

ಮಹಿಳೆಯರು ಮತ್ತು ಮಕ್ಕಳ ದೈಹಿಕ ಶೋಷಣೆ, ಬಲವಂತದ ದುಡಿಮೆ, ಲೈಂಗಿಕ ಶೋಷಣೆ ಹಾಗೂ ಬಾಲ ಕಾರ್ಮಿಕತೆ, ಜೀತ, ಭಿಕ್ಷಾಟನೆಯಲ್ಲಿ ತೊಡಗಿಸುವಂತಹ ಕೃತ್ಯಗಳು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದ್ದು, ಇವುಗಳನ್ನು ತಡೆಯಲು ಎಲ್ಲಾ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಜಾಗೃತಿ ಮೂಡಿಸುವುದು ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ಬಾಲಕಾರ್ಮಿಕತೆ, ಜೀತ ಪದ್ಧತಿ, ವಲಸೆ ಕಾರ್ಮಿಕರ ಶೋಷಣೆ, ಭಿಕ್ಷಾಟನೆ, ವೇಶ್ಯಾವಾಟಿಕೆ, ಮಕ್ಕಳ ಲೈಂಗಿಕ ದೌರ್ಜನ್ಯ, ಬಲವಂತದ ಬಾಲ್ಯವಿವಾಹ, ದುರುಪಯೋಗಪಡಿಸಿಕೊಳ್ಳುವ ದತ್ತು ಸ್ವೀಕಾರ ಹಾಗೂ ಡ್ರಗ್ ಪೆಡ್ಲಿಂಗ್ಗಳು ಸಮಾಜಕ್ಕೆ ಶಾಪವಾಗಿದ್ದು ಇದನ್ನು ತೊಡೆದು ಹಾಕಲು ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರವು ‘ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿ ಪುಸ್ತಕ’ವನ್ನು ಹೊರತಂದಿದೆ. ಅಧಿಕಾರಿಗಳು ಕೇವಲ ಮಾರ್ಗಸೂಚಿಗೆ ಸೀಮಿತವಾಗದೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಂತ್ರಸ್ತರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿಸುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ.ಎಸ್. ಮಾತನಾಡಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಗೆ ಬಲಿಯಾಗುತ್ತಿರುವುದು ವಿಷಾಧನೀಯ. ಇದನ್ನು ತಡೆಗಟ್ಟಲು ನಾವೆಲ್ಲರೂ ಶ್ರಮಿಸಬೇಕು. ಮಾರ್ಗಸೂಚಿನಗಳಾಚೆ ಕಾರ್ಯ ಕೈಗೊಳ್ಳಬೇಕು.
ಅಪರಾಧ ನಡೆದಾಗ ತನಿಖೆ, ಸಾಕ್ಷ್ಯ ಸಂಗ್ರಹ, ನೊಂದವರಿಗೆ ಆಪ್ತ ಸಮಾಲೋಚನೆ ಹಾಗೂ ಸೂಕ್ತ ಪರಿಹಾರ ಒದಗಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆದಾಗ ಮಾತ್ರ ನ್ಯಾಯ ಸಿಗಲು ಸಾಧ್ಯವಾಗುತ್ತದೆ. ಆದ್ದರಿಂದ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವ ಬಗ್ಗೆ ವ್ಯಾಪಕ ಅರಿವು ಮೂಡಿಸುವುದು, ನ್ಯಾಯ ಪ್ರಕ್ರಿಯೆ, ಆಪ್ತಸಮಾಲೋಚನೆ ಮತ್ತು ಪುನರ್ವಸತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ. ಅವರು ಭಾಗವಹಿಸಿ ಪ್ರತಿಜ್ಞಾವಿಧಿ ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್. ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ. ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ಉಪಸ್ಥಿತರಿದ್ದರು.
ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಆರಕ್ಷಕ ಉಪ ನಿರೀಕ್ಷಕ ಸಿದ್ಧರಾಮಪ್ಪ ಕೆ. ಮತ್ತು ಹೆಡ್ ಕಾನ್ಸ್ಟೇಬಲ್ ಮಂಜುನಾಥ ಪಾಟೀಲ್ ಅವರು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಕವಿತ ಕಾರ್ಯಕ್ರಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ ಮತ್ತು ಇತರೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
=