ಶಿವಮೊಗ್ಗ, ಜು. 30: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಬುಧವಾರ ಹಾರನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಬಾಳೆಕೊಪ್ಪ, ಹಾರನಹಳ್ಳಿ, ಕೊನಗವಳ್ಳಿ, ತ್ಯಾಜವಳ್ಳಿ ಹಾಗೂ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಕೃಷಿ ಜಮೀನುಗಳು, ಬೆಳೆಗಳ ಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ರೈತರಿಂದ ನೇರವಾಗಿ ಮಾಹಿತಿ ಪಡೆದರು.


ರೈತರು ಮಳೆಯ ಅಭಾವದಿಂದ ಬೆಳೆಗಳು ಒಣಗುತ್ತಿರುವುದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆ ಎದುರಾಗಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಮಸ್ಯೆಗಳನ್ನು ಆಲಿಸಿದ ಶಾಸಕರು, ರೈತರ ಸಮಸ್ಯೆಗಳ ಕುರಿತು ಸರ್ಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳ ಗಮನಸೆಳೆಯುವ ಮೂಲಕ ತ್ವರಿತ ಪರಿಹಾರ ಕಂಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ವೇಳೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಗ್ರಾಮವಾರು ಸಮಗ್ರ ವರದಿ ಸಿದ್ಧಪಡಿಸಿ, ಬೆಳೆ ಹಾನಿಯ ನಿಖರ ಮೌಲ್ಯಮಾಪನ ನಡೆಸುವಂತೆ ಹಾಗೂ ಕುಡಿಯುವ ನೀರು, ಮೇವು, ನೀರಾವರಿ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಬರ ನಿರ್ವಹಣೆಗೆ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳು ಅರ್ಹ ರೈತರಿಗೆ ತಲುಪುವಂತೆ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.

ಬರ ಪರಿಸ್ಥಿತಿಯನ್ನು ಕೇವಲ ಕಚೇರಿ ವರದಿಗಳ ಆಧಾರದ ಮೇಲೆ ಅಂದಾಜಿಸುವ ಬದಲು, ನೈಜ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲು ಗ್ರಾಮಗಳಿಗೆ ಭೇಟಿ ನೀಡಲಾಗಿದೆ ಎಂದು ಶಾಸಕರು ತಿಳಿಸಿದರು. ರೈತರ ಹಿತಾಸಕ್ತಿ ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ಯಾವುದೇ ರೈತ ಸಂಕಷ್ಟಕ್ಕೆ ಸಿಲುಕದಂತೆ ಅಗತ್ಯ ನೆರವು ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ಬರ ವೀಕ್ಷಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ಜಿಲ್ಲಾ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸತೀಶ್ ಕಸಟಿ, ಕಾರ್ಯಾಧ್ಯಕ್ಷ ಕಾಂತರಾಜ್ ಸೋಮಿಕೊಪ್ಪ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ದೀಪಕ್ ಪುರ್ಯಾನಾಯ್ಕ್, ಜಿಲ್ಲಾ ಮುಖಂಡ ಕುಮಾರ್ ನಾಯ್ಕ್, ಕಸಟಿ ರುದ್ರೇಶ್, ಗೀತಾ ಸತೀಶ್, ಬಸವರಾಜ್ ಮತ್ತು ಯೋಗೇಶ್ ಸೇರಿದಂತೆ ಸ್ಥಳೀಯ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ಹಿರಿಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದು, ತಮ್ಮ ಗ್ರಾಮಗಳ ಸಮಸ್ಯೆಗಳನ್ನು ವಿವರಿಸಿ ತ್ವರಿತ ಪರಿಹಾರಕ್ಕೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಅಡಿಕೆ ತೋಟಗಳಲ್ಲಿ ನೂರಾರು ಅಡಿಕೆ ಗಿಡಗಳು ನೆಲಕ್ಕುರುಳಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್ಡಿಆರ್ಎಫ್) ಮಾರ್ಗಸೂಚಿಗಳಡಿ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ದೊರಕುವಂತೆ ವಿಧಾನಸಭೆಯಲ್ಲಿ ಧ್ವನಿಯೆತ್ತಿ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ಭರವಸೆ ನೀಡಿದರು.