ಶಿವಮೊಗ್ಗ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಲ್ಲಿ ಮಠಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ, ಶಿವಮೊಗ್ಗ.ಇವರ ಸಂಯುಕ್ತ ಆಶಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರಿಗಾಗಿ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ಸಂದರ್ಭದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಗತ್ಯವಾಗಿದೆ. ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲೆಗಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಮಠಮಾನ್ಯಗಳು ರಾಜ್ಯದ ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ. ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವುದು ಸಂತಸದ ಸಂಗತಿ. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ, ಶಿಸ್ತು ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿ ಎಂದರು.

ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ನಾದಮಯಾನಂದ ಸ್ವಾಮೀಜಿ,ಶ್ರೀ ರಾಜಯೋಗಾನಂದನಾಥ ಸ್ವಾಮೀಜಿ, ಶ್ರೀ ಸಂವಿಧಾನಂದನಾಥ ಸ್ವಾಮೀಜಿ ಯವರು ದಿವ್ಯ ಸಾನಿಧ್ಯ ವಹಿಸಿದ್ದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಎಸ್. ಆರ್.ಮಾತನಾಡುತ್ತಾ,ವಿದ್ಯಾರ್ಥಿಗಳ ಬದುಕಿನಲ್ಲಿ ಕ್ರೀಡೆ ಅವಶ್ಯಕ, ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಹೊತ್ತು ಕೊಟ್ಟಾಗ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯಎಂದರು. ಸೋಲು ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ರಮೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ, ರೇಖ್ಯಾನಾಯ್ಕ, ಸಂಸ್ಥೆ ನಿರ್ದೇಶಕರುಗಳಾದ ಕೊಳಿಗೆ ವಾಸಪ್ಪಗೌಡ, ರವೀಶ್, ಕುಮಾರ ಸ್ವಾಮಿ, ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಶಶಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಚುಂಚಾದ್ರಿ ಕಪ್ ವಾಲಿಬಾಲ್ ಮೊದಲು ಶಿವಮೊಗ್ಗ ನಗರಕ್ಕೆ ಮಾತ್ರ ಸೀಮಿತವಾಗಿತ್ತು.ಈಗ ಸುಮಾರು ವರ್ಷಗಳಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಾ ಬಂದಿದ್ದು, ಜಿಲ್ಲೆಯ ನಗರ ಪ್ರದೇಶಗಳಲ್ಲದೇ,ಹಳ್ಳಿ ಹಳ್ಳಿಗಳಲ್ಲಿಯೂ ಇವತ್ತು ವಾಲಿಬಾಲ್ ಕ್ರೀಡೆ, ವರ್ಷದಿಂದ ವರ್ಷಕ್ಕೆ ಭಾಗವಹಿಸುವವರ ಸಂಖ್ಯೆ ದುಪ್ಪಟ್ಟಾಗಿದೆ.ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್,ಟಿವಿಗಳ ಹಾವಳಿಯಿಂದ ಕ್ರೀಡೆಗೆ ಎಲ್ಲೋ ಒಂದು ರೀತಿ ಪ್ರಾಮುಖ್ಯತೆ ಕಡಿಮೆಯಾಗುತ್ತಾ ಇದೆ ಎಂಬುದು ನನ್ನ ಭಾವನೆ. ಓದಿಗೆ ಕೊಡುವಷ್ಟು ಪ್ರಾಮುಖ್ಯತೆಯನ್ನು, ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆಯನ್ನು ಕೊಡಬೇಕು ಎಂದರು.
– ಭಾಸ್ಕರ್ ಜಿ.ಕಾಮತ್, ಅಧ್ಯಕ್ಷರು.
ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ,