ಆ, 15
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನ ಮುಂದುವರಿಸಲು ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ.


ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 01-02-2019ವರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಸಣ್ಣ, ಅತಿ ಸಣ್ಣ, ಮಧ್ಯಮ ಹಾಗೂ ದೊಡ್ಡ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳನ್ನು (ಪ್ರತಿ 4 ತಿಂಗಳಿಗೊಮ್ಮೆ 2,000 ರೂ.ಗಳಂತೆ 3 ಕಂತುಗಳಲ್ಲಿ) ನೀಡಲಾಗುತ್ತಿದೆ.
ಈ ಪ್ರೋತ್ಸಾಹಧನವನ್ನು ಮುಂದುವರಿಸಲು ‘ಫ್ರೂಟ್ಸ್’ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ‘ಅಗ್ರಿ ಸ್ಟಾಕ್’ ಯೋಜನೆಯಡಿ ಗುರುತಿನ ಸಂಖ್ಯೆಯನ್ನು ಸೃಷ್ಟಿಸುವುದು ಕಡ್ಡಾಯವಾಗಿದೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ ಸಿ) ಅಥವಾ ‘ಗ್ರಾಮ ಒನ್’ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇ-ಕೆವೈಸಿ ಪೂರ್ಣಗೊಳಿಸಬಹುದು.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ

‘PMKISAN e-KYC through FaceRecognition App’ ಮೂಲಕವೂ ರೈತರು ಸ್ವತಃ ಇ-ಕೆವೈಸಿ ಮಾಡಿಕೊಳ್ಳಬಹುದು.

ಅರ್ಹ ರೈತರೆಲ್ಲರೂ ಶೀಘ್ರವೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾಗಿ ಅವರು ಕೋರಿದ್ದಾರೆ.